ರಾಯಚೂರು, ಜುಲೈ 29: ರ ಅಂತರರಾಜ್ಯ,ಜಿಲ್ಲೆಗಳದಿಂದ ಬಂದು ಕಳ್ಳತನ ಮತ್ತು ದರೋಡೆ ನಡೆಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ವಿವಿಧ ರಾಜ್ಯಗಳ ಪೊಲೀಸರೊಂದಿಗೆ ಸಮನ್ವಯ ಸಾಧಿಸಿ ಆರೋಪಿಗಳನ್ನು ಬಂಧಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲಾಗುತ್ತಿದೆ ತಂತ್ರಜ್ಞಾನ ಬಳಸಿ ಪತ್ತೆ ಮಾಡಲು ಉದ್ದೇಶಿಸಕಾಗಿದೆ ಎಂದು ಬಳ್ಳಾರಿ ವಲಯದ ಪೊಲೀಸ್ ಮಹಾನಿರೀಕ್ಷಕ (ಐಜಿಪಿ) ಡಾ. ಪಿ.ಎಸ್. ಹರ್ಷ ಹೇಳಿದರು.ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಕಳವು ಪ್ರಕರಣಗಳಲ್ಲಿ ಪತ್ತೆಯಾದ ವಸ್ತುಗಳನ್ನು ಮಾಲೀಕರಿಗೆ ಹಸ್ತಾಂತರಿಸಿದ ಬಳಿಕ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಹೊಸ ತಂತ್ರಜ್ಞಾನಗಳ ನೆರವಿನಿಂದ ಆರೋಪಿಗಳ ಬೆರಳಚ್ಚುಗಳನ್ನು (ಫಿಂಗರ್ಪ್ರಿಂಟ್) ಪರಿಶೀಲಿಸಿ, ದೇಶದ ಯಾವ ಭಾಗದಲ್ಲಿ ಅವರು ಅಪರಾಧ ಎಸಗಿದ್ದಾರೆ ಎಂಬ ಸಂಪೂರ್ಣ ಮಾಹಿತಿ ಪಡೆಯಲು ಸಾಧ್ಯವಾಗುತ್ತಿದೆ. ಇದರಿಂದ ಆರೋಪಿಗಳನ್ನು ಶೀಘ್ರವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತಿದೆ ಎಂದು ತಿಳಿಸಿದರು.ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲಿ ವಿಶೇಷ ತನಿಖಾ ವ್ಯವಸ್ಥೆಯನ್ನು ಬಲಪಡಿಸಲಾಗುತ್ತಿದ್ದು, ಮನೆ ಕಳ್ಳತನ, ಸೈಬರ್ ವಂಚನೆ ಸೇರಿದಂತೆ ವಿವಿಧ ಪ್ರಕರಣಗಳನ್ನು ತ್ವರಿತವಾಗಿ ಪತ್ತೆಹಚ್ಚುವ ನಿಟ್ಟಿನಲ್ಲಿ ಹೊಸ ಕ್ರಮಗಳನ್ನು ಜಾರಿಗೊಳಿಸಲಾಗಿದೆ ಎಂದರು.ಅಂತರರಾಜ್ಯ ದರೋಡೆಕೋರರು ರಾಜ್ಯಕ್ಕೆ ಬಂದು ಅಪರಾಧ ಎಸಗಿ, ಕಳುವಾದ ವಾಹನಗಳನ್ನು ಬೇರೆ ರಾಜ್ಯಗಳಲ್ಲಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಸಾರ್ವಜನಿಕರು ಕಡಿಮೆ ಬೆಲೆಗೆ ವಾಹನ ಖರೀದಿಸುವ ಮುನ್ನ ಅದರ ದಾಖಲೆಗಳನ್ನು ಸಮಗ್ರವಾಗಿ ಪರಿಶೀಲಿಸಬೇಕು. ಅನುಮಾನಾಸ್ಪದ ವಾಹನಗಳ ಬಗ್ಗೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.ರಾಯಚೂರು ಜಿಲ್ಲೆ ಆಂಧ್ರಪ್ರದೇಶ ಗಡಿಭಾಗ ಹೊಂದಿರುವುದರಿಂದ ಗಾಂಜಾ ಹಾಗೂ ಸಿಎಚ್ ಪೌಡರ್ ಮಿಶ್ರಿತ ಸೇಂದಿ (ಮಾದಕ ವಸ್ತು) ಸಾಗಾಟ ನಡೆಯುತ್ತಿರುವ ಮಾಹಿತಿ ಇದೆ. ಇದನ್ನು ತಡೆಯಲು ರೈಲ್ವೆ ಪೊಲೀಸ್ ಹಾಗೂ ಗಡಿಭಾಗದ ಚೆಕ್ಪೋಸ್ಟ್ಗಳಲ್ಲಿ ನಿರಂತರ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದರು.ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ‘ನಶಾಮುಕ್ತ ಅಭಿಯಾನ’ ಹಮ್ಮಿಕೊಂಡು ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕರಲ್ಲಿ ನಿರಂತರ ಜಾಗೃತಿ ಮೂಡಿಸುವ ಕಾರ್ಯ ಕೈಗೊಂಡಿದೆ ಎಂದು ತಿಳಿಸಿದರು.’ಮನೆ-ಮನೆಗೆ ಪೊಲೀಸ್’ ಅಭಿಯಾನ ಮುಂದುವರಿದಿದ್ದು, ಜನಸ್ನೇಹಿ ಪೊಲೀಸ್ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಸಾರ್ವಜನಿಕರ ಬಳಿಗೆ ತೆರಳಿ ಸಮಸ್ಯೆಗಳನ್ನು ಆಲಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ಹೇಳಿದರು.ದೇವಸ್ಥಾನಗಳಲ್ಲಿ ಹುಂಡಿ ಹಾಗೂ ಚಿನ್ನಾಭರಣ ಕಳ್ಳತನ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆಯ ವ್ಯಾಪ್ತಿಯ ದೇವಾಲಯಗಳಲ್ಲಿ ಸಿಸಿ ಟಿವಿ ಕ್ಯಾಮೆರಾಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡದ ದೇವಸ್ಥಾನಗಳ ಆಡಳಿತ ಮಂಡಳಿಗಳಿಗೂ ಸಿಸಿ ಟಿವಿ ಅಳವಡಿಸುವಂತೆ ಸೂಚನೆ ನೀಡಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಗ್ಷು ಗಿರಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಿ. ಹರೀಶ, ಡಿವೈಎಸ್ಪಿ ಶಾಂತವೀರ, ಡಿಎಸ್ಪಿ ದತ್ತಾತ್ರೇಯ, ಚಂದ್ರಶೇಖರ, ಸಿಪಿಐ ಸಿಂಗಪ್ಪ, ಸಾಬಣ್ಣ ನಾಯಕ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.





Recent Comments