ನವದೆಹಲಿ,ಜೂ.೨೩-ನೂತನವಾಗಿ ಅಧಿಕಾರ ಸ್ವೀಕರಿಸಿದ ನೈರುತ್ಯ ರೈಲ್ವೆ ನಿರ್ಮಾಣ ವಿಭಾಗದ ಮುಖ್ಯ ಆಡಳಿತಾಧಿಕಾರಿ ಅಭಯ್ ಕುಮಾರ್ ಗುಪ್ತಾ ಅವರನ್ನು ರಾಯಚೂರು ಯಾದಗಿರಿ ಲೋಕಸಭಾ ಕ್ಷೇತ್ರದ ಸಂಸದ ಜಿ ಕುಮಾರ ನಾಯಕ ಭೇಟಿ ಮಾಡಿ, ರಾಯಚೂರು ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಹಲವು ಮಹತ್ವದ ರೈಲ್ವೆ ಯೋಜನೆಗಳ ಪ್ರಗತಿ ಹಾಗೂ ಅನುಷ್ಠಾನದ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿದರು.ಈ ವೇಳೆಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ನಿರ್ಣಾಯಕವಾಗಿರುವ ರೈಲ್ವೆ ಯೋಜನೆಗಳ ಬಗ್ಗೆ ವಿಶೇಷವಾಗಿ ಗಮನ ಸೆಳೆದರು.ರಾಯಚೂರು–ಗಿಣಿಗೇರಾ ಹೊಸ ರೈಲು ಮಾರ್ಗ ಯೋಜನೆ, ಗದಗ–ವಾಡಿ ರೈಲು ಮಾರ್ಗ ಯೋಜನೆ,ಪ್ರಸ್ತಾವಿತ ಅಲಮಟ್ಟಿ–ಯಾದಗಿರಿ ರೈಲು ಮಾರ್ಗದ ಅಂತಿಮ ಮಾರ್ಗ ನಿರ್ಧಾರ ಸಮೀಕ್ಷೆಗೆ ಸಂಬಂಧಿಸಿದ ಟೆಂಡರ್ ಪ್ರಕ್ರಿಯೆ ಚುರುಕುಗೊಳಿಸುವದು,ರೈಲ್ವೆ ಮೂಲಸೌಕರ್ಯಗಳ ಬಲವರ್ಧನೆ ಹಾಗೂ ಭವಿಷ್ಯದ ಸಂಪರ್ಕ ಜಾಲ ವಿಸ್ತರಣೆಯ ಅಗತ್ಯತೆ ಈ ಯೋಜನೆಗಳು ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ಅತ್ಯಂತ ಮಹತ್ವದ್ದಾಗಿದ್ದು, ಪ್ರದೇಶದ ಕೈಗಾರಿಕೆ,ಕೃಷಿ,ವ್ಯಾಪಾರ-ವಹಿವಾಟು ಹಾಗೂ ಉದ್ಯೋಗಾವಕಾಶಗಳ ವೃದ್ಧಿಗೆ ಪೂರಕವಾಗಲಿವೆ ಎಂದು ತಿಳಿಸಿದರು. ಅಲ್ಲದೆ, ಈ ರೈಲು ಮಾರ್ಗಗಳು ಜನರ ಸಂಚಾರವನ್ನು ಸುಗಮಗೊಳಿಸುವುದರ ಜೊತೆಗೆ ಸರಕು ಸಾಗಾಣಿಕೆ ವ್ಯವಸ್ಥೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಿ, ಹೂಡಿಕೆ ಮತ್ತು ಆರ್ಥಿಕ ಚಟುವಟಿಕೆಗಳಿಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿವೆ ಎಂದು ಮನವರಿಕೆ ಮಾಡಿದರು.ವಿಶೇಷವಾಗಿ, ದಶಕಗಳಿಂದ ಈ ಭಾಗದ ಜನರು ನಿರೀಕ್ಷಿಸುತ್ತಿರುವ ರೈಲ್ವೆ ಯೋಜನೆಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಂಡು, ಅಗತ್ಯ ಆಡಳಿತಾತ್ಮಕ ಹಾಗೂ ತಾಂತ್ರಿಕ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸುವಂತೆ ಮನವಿ ಮಾಡಿದರು. ರೈಲ್ವೆ ಸಂಪರ್ಕ ವಿಸ್ತರಣೆಯು ಗ್ರಾಮೀಣ ಮತ್ತು ನಗರ ಪ್ರದೇಶಗಳ ನಡುವಿನ ಅಂತರವನ್ನು ಕಡಿಮೆ ಮಾಡಿ, ಪ್ರದೇಶದ ಸರ್ವತೋಮುಖ ಅಭಿವೃದ್ಧಿಗೆ ದಾರಿಯಾಗಲಿದೆ ಎಂದು ಚರ್ಚೆಯ ವೇಳೆ ತಿಳಿಸಿದರು. ರೈಲ್ವೆ ಯೋಜನೆಗಳ ಪ್ರಗತಿಗೆ ಅಗತ್ಯ ಸಹಕಾರ ಮತ್ತು ಬೆಂಬಲ ನೀಡುವುದಾಗಿ ಗುಪ್ತಾರವರು ಭರವಸೆ ನೀಡಿದರು. ಯೋಜನೆಗಳ ಅನುಷ್ಠಾನ ಪ್ರಕ್ರಿಯೆಯನ್ನು ವೇಗಗೊಳಿಸಲು ಇಲಾಖೆಯ ಮಟ್ಟದಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.ರೈಲ್ವೆ ಸಂಪರ್ಕ ವ್ಯವಸ್ಥೆಯ ಬಲವರ್ಧನೆಯ ಮೂಲಕ ಕಲ್ಯಾಣ ಕರ್ನಾಟಕ ಭಾಗವನ್ನು ರಾಜ್ಯ ಹಾಗೂ ರಾಷ್ಟ್ರದ ಪ್ರಮುಖ ಅಭಿವೃದ್ಧಿ ಕೇಂದ್ರಗಳೊಂದಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ಸಂಪರ್ಕಿಸುವ ನಿಟ್ಟಿನಲ್ಲಿ ಈ ಯೋಜನೆಗಳು ಮಹತ್ವದ ಪಾತ್ರ ವಹಿಸಲಿದ್ದು, ಅವುಗಳ ಶೀಘ್ರ ಪೂರ್ಣಗೊಳಿಸುವಿಕೆಗಾಗಿ ನಿರಂತರವಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.





Recent Comments