ರಾಯಚೂರು, ಆ. 04: ತಾಲೂಕಿನ ಇಡಪನೂರು, ಗಾಣದಾಳ ಹಾಗೂ ಎನ್. ಮಲ್ಕಾಪುರ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳ್ಳುತ್ತಿರುವ ವಿಬಿ ಜಿ ರಾಮ್ ಜಿ ಹಾಗೂ ಜಲ ಜೀವನ್ ಮಿಷನ್ ಯೋಜನೆಯ ಕಾಮಗಾರಿಗಳ ಸ್ಥಳಗಳಿಗೆ ಜಿಲ್ಲಾ ಪಂಚಾಯತ್ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮೊದಲಿಗೆ ಇಡಪನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಅಡುಗೆ ಕೋಣೆಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಿದರು. ಸಿಬ್ಬಂದಿಯ ಹಾಜರಾತಿ, ಅಡುಗೆ ತಯಾರಿಸುವ ಸ್ಥಳ, ಪಾತ್ರೆಗಳು ಹಾಗೂ ದಾಸ್ತಾನು ಕೊಠಡಿಯನ್ನು ಪ್ರತಿನಿತ್ಯ ಶುಚಿಯಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು. ಅಡುಗೆ ಸಿಬ್ಬಂದಿಯು ಕಡ್ಡಾಯವಾಗಿ ವೈಯಕ್ತಿಕ ಸ್ವಚ್ಛತೆ ಹಾಗೂ ನೈರ್ಮಲ್ಯ ಕಾಪಾಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.ವಸತಿ ನಿಲಯದ ಆವರಣದಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳಿಗೆ ಅನುಗುಣವಾಗಿ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಕ್ರಿಯಾ ಯೋಜನೆ ಸಿದ್ಧಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಶೈಕ್ಷಣಿಕ ಪ್ರವಾಸದ ಕುರಿತು ಮಾಹಿತಿ ಪಡೆದ ಅವರು, ಡಿಸೆಂಬರ್ ತಿಂಗಳಲ್ಲಿ ಶೈಕ್ಷಣಿಕ ಪ್ರವಾಸವನ್ನು ಆಯೋಜಿಸುವುದಾಗಿ ಭರವಸೆ ನೀಡಿದರು.ತದನಂತರ ಕೆರೆ ಅಭಿವೃದ್ಧಿ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು. 2. ವಿಬಿ ಜಿ ರಾಮ್ ಜಿ ಯೋಜನೆಯಡಿ ಕಾಮಗಾರಿಗಳ ಪರಿಶೀಲನೆ ಮೂಲಕ ಗುಣಮಟ್ಟದ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗುತ್ತದೆ. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ವಿಬಿ ಜಿ ರಾಮ್ ಜಿ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುತ್ತದೆ. ಕೆರೆ ಅಭಿವೃದ್ಧಿ, ಉದ್ಯೋಗ ಸೃಷ್ಟಿ ಮತ್ತು ಜನಪರ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತದೆಂದರು. ಕೂಲಿಕಾರರ ಹಾಜರಾತಿಯನ್ನು ಕಡ್ಡಾಯವಾಗಿ ಎನ್ಎಂಎಂಎಸ್ ಮೂಲಕ ದಾಖಲಿಸಬೇಕು. ಕಾಮಗಾರಿಗಳ ಮೂರು ಹಂತಗಳ ಛಾಯಾಚಿತ್ರಗಳನ್ನು ನಿರ್ವಹಿಸಬೇಕು. ಪಿಡಿಒ, ತಾಂತ್ರಿಕ ಸಹಾಯಕರು ಹಾಗೂ ಬಿಎಫ್ಟಿ ಸಿಬ್ಬಂದಿಗಳು ಕಾಮಗಾರಿ ಸ್ಥಳಗಳಿಗೆ ನಿಯಮಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಸೂಚಿಸಿದರು.ಎನ್. ಮಲ್ಕಾಪುರ ಗ್ರಾಮ ಪಂಚಾಯಿತಿಯ ಗುಂಡ್ರವೇಲಿ ಗ್ರಾಮದ ಅಂಗನವಾಡಿ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಮಕ್ಕಳ ಹಾಜರಾತಿ, ಪೌಷ್ಟಿಕ ಆಹಾರ ವಿತರಣೆ ಹಾಗೂ ಮೂಲಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಆಹಾರ ಪದಾರ್ಥಗಳ ಆವಕ-ಜಾವಕ ದಾಖಲೆಗಳನ್ನು ವೀಕ್ಷಿಸಿದರು. ಸಿಸಿ ರಸ್ತೆ ಕಾಮಗಾರಿಯನ್ನು ಪರಿಶೀಲಿಸಿದ ಅವರು, ಜಲ ಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಳ ಸಂಪರ್ಕ ಕಲ್ಪಿಸಿರುವ ಕುರಿತು ಗ್ರಾಮಸ್ಥರಿಂದ ಮಾಹಿತಿ ಪಡೆದರು.ನಂತರ ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಭೇಟಿ ನೀಡಿ ವಿಜ್ಞಾನ ಪ್ರಯೋಗಾಲಯವನ್ನು ವೀಕ್ಷಿಸಿದರು. ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ ಅವರ ಕುಂದುಕೊರತೆಗಳನ್ನು ಆಲಿಸಿದರು. ವಸತಿ ನಿಲಯವನ್ನು ಉತ್ತಮವಾಗಿ ನಿರ್ವಹಿಸುತ್ತಿರುವ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಭೋಜನಾಲಯದಲ್ಲಿ ಶುಚಿತ್ವ ಕಾಪಾಡಿಕೊಂಡು ಗುಣಮಟ್ಟದ ಆಹಾರವನ್ನು ಒದಗಿಸಬೇಕು ಎಂದು ಸೂಚಿಸಿದರು.ಗಾಣದಾಳ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ಗುರಿಗೆ ಅನುಗುಣವಾಗಿ ತೆರಿಗೆ ವಸೂಲಿ ಮಾಡಬೇಕು ಎಂದು ಸೂಚಿಸಿದರು. ಜಲ ಜೀವನ್ ಮಿಷನ್ ಹಾಗೂ ವಿಬಿಜಿಆರ್ವೈ ಯೋಜನೆಯಡಿ ಹೆಚ್ಚಿನ ಮಾನವ ದಿನಗಳನ್ನು ಸೃಜಿಸುವಂತೆ ತಿಳಿಸಿದರು. ಅಲ್ಲದೆ, ಸಿಬ್ಬಂದಿಯ ಸಮಸ್ಯೆಗಳು ಮತ್ತು ಅಗತ್ಯತೆಗಳ ಕುರಿತು ಮಾಹಿತಿ ಪಡೆದು ಆಲಿಸಿದರು.ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರಶೇಖರ ಪವಾರ್, ಸಹಾಯಕ ನಿರ್ದೇಶಕ ಹನುಮಂತ, ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀ ಈರಣ್ಣ ಕೋಸಗಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮನ್ಸೂರ್ ಖಾನ್, ಸಹಾಯಕ ಕಾರ್ಯಪಾಲಕ ಅಭಿಯಂತರ ಅಲ್ತಾಫ್, ಕಿರಿಯ ಅಭಿಯಂತರ ಮಹೇಶ್, ಪಿಡಿಒಗಳು, ಟಿಎಂಎಸ್, ಟಿಸಿ, ಡಿಐಇಸಿ, ತಾಂತ್ರಿಕ ಸಹಾಯಕರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಉಪಸ್ಥಿತರಿದ್ದರು.






Recent Comments