ಮಂತ್ರಾಲಯ: ಶ್ರೀ ರಾಯರ ಮಧ್ಯಾರಾಧನಾ ಮಹೋತ್ಸವದ ಅಂಗವಾಗಿ ಶ್ರೀ ರಾಘವೇಂದ್ರ ಸ್ವಾಮಿಗಳವರ ಮೂಲ ಬೃಂದಾವನಕ್ಕೆ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಭಕ್ತಿಭಾವದಿಂದ ಮಹಾ ಪಂಚಾಮೃತಾಭಿಷೇಕ ನೆರವೇರಿಸಿದರು.ಅಭಿಷೇಕದ ಬಳಿಕ ಶ್ರೀ ರಾಯರ ಪ್ರಾತಃಕಾಲದ ರಥೋತ್ಸವವು ವೈಭವದಿಂದ ನಡೆಯಿತು. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಭಕ್ತರು ಹಾಗೂ ಶಿಷ್ಯರು ಪಾಲ್ಗೊಂಡು, ರಥೋತ್ಸವವನ್ನು ಕಣ್ತುಂಬಿಕೊಂಡರು. ಶ್ರೀ ರಾಯರ ದರ್ಶನ ಪಡೆದು, ಅವರ ದಿವ್ಯ ಆಶೀರ್ವಾದಕ್ಕೆ ಪಾತ್ರರಾದರು.ನಂತರ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಅವರು ಶ್ರೀ ಬ್ರಹ್ಮ ಕರಾರ್ಚಿತ ಮೂಲರಾಮದೇವರ ಪೂಜೆ ನೆರವೇರಿಸಿದರು. ಬಳಿಕ ಶ್ರೀ ರಾಘವೇಂದ್ರ ಸ್ವಾಮಿಗಳವರಿಗೆ ಮಹಾ ಮಂಗಳಾರತಿ ಸಲ್ಲಿಸಿ, ಸಮಸ್ತ ಭಕ್ತರ ಸುಖ, ಶಾಂತಿ, ಆರೋಗ್ಯ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.ಶ್ರೀ ರಾಯರ ಮಧ್ಯಾರಾಧನಾ ಮಹೋತ್ಸವದ ಅಂಗವಾಗಿ ನಡೆದ ಈ ಧಾರ್ಮಿಕ ಕಾರ್ಯಕ್ರಮವು ಭಕ್ತಿ ಮತ್ತು ಆಧ್ಯಾತ್ಮಿಕ ವಾತಾವರಣದಲ್ಲಿ ವಿಜೃಂಭಣೆಯಿಂದ ಜರುಗಿತು.





Recent Comments