ರಾಯಚೂರು: ಮತದಾರರ ಪಟ್ಟಿಪರಿಷ್ಕರಣೆ ಕಾರ್ಯಕ್ಕೆ ಗೈರುಹಾಜರಾಗಿ ಅನಾರೋಗ್ಯದ ಹೆಸರಿನಲ್ಲಿ ಸುಳ್ಳು ದಾಖಲೆ ಸಲ್ಲಿಸಿ ಚುನಾವಣಾ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ದೇವದುರ್ಗ ತಾಲೂಕಿನ ನಗರಗುಂಡ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಸಂಗಮೇಶ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಪೂವಿತಾ ಆದೇಶ ಹೊರಡಿಸಿದ್ದಾರೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಯಾದ ಬಳಿಕ ಅನಾರೋಗ್ಯದ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ದಾಖಲೆ ಸಲ್ಲಿಸಲಾಗಿತ್ತು. ಆದರೆ ಪರಿಶೀಲನೆ ವೇಳೆ ಆ ದಾಖಲೆ ಸುಳ್ಳು ಎಂಬುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ, ಚುನಾವಣಾ ಕರ್ತವ್ಯವನ್ನು ನಿರ್ಲಕ್ಷಿಸಿರುವ ಆರೋಪದ ಮೇರೆಗೆ ಶಿಕ್ಷಕ ಸಂಗಮೇಶ ಅವರನ್ನು ತಕ್ಷಣದಿಂದಲೇ ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಚುನಾವಣಾ ಕರ್ತವ್ಯದಲ್ಲಿ ನಿರ್ಲಕ್ಷ್ಯ ಅಥವಾ ಸುಳ್ಳು ದಾಖಲೆ ಸಲ್ಲಿಸುವಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಜಿಲ್ಲಾಡಳಿತ ತಿಳಿಸಿದೆ.




Recent Comments