ರಾಯಚೂರು: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಆರು ಬಾರಿ ಶಾಸಕರಾಗಿರುವ ತನ್ವೀರ್ ಸೇಠ್ ಅವರಿಗೆ ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನ ನೀಡುವಂತೆ ತಸ್ವೀರ್ ಸೇಠ್ ಅಭಿಮಾನಿಗಳ ಬಳಗದ ಆದೀಲ್ ಶೇಖ್ ಆಗ್ರಹಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ತನ್ವೀರ್ ಸೇಠ್ ಅವರು ಸುಮಾರು 25 ವರ್ಷಗಳಿಂದ ಜನಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಎಲ್ಲಾ ಸಮುದಾಯಗಳ ನಡುವೆ ಸೌಹಾರ್ದತೆ, ಸಹೋದರತ್ವ ಹಾಗೂ ಏಕತೆಯ ಭಾವನೆಯನ್ನು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸೌಮ್ಯ ಸ್ವಭಾವ, ಪ್ರಾಮಾಣಿಕತೆ ಮತ್ತು ಜನಪರ ಆಡಳಿತದ ಮೂಲಕ ಅವರು ಜನರ ವಿಶ್ವಾಸ ಗಳಿಸಿರುವ ನಾಯಕರಾಗಿದ್ದಾರೆ ಎಂದು ಹೇಳಿದರು.
ಮೈಸೂರು ನಗರದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಕಾನೂನು-ಸುವ್ಯವಸ್ಥೆ ಕಾಪಾಡುವಲ್ಲಿ ತನ್ವೀರ್ ಸೇಠ್ ಅವರ ಪಾತ್ರ ಮಹತ್ವದ್ದಾಗಿದೆ. ಆಡಳಿತದ ಕುರಿತ ಆಳವಾದ ಅನುಭವ, ದೂರದೃಷ್ಟಿ ಹಾಗೂ ಸಮಾವೇಶಾತ್ಮಕ ನಾಯಕತ್ವದಿಂದ ಅವರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ ಎಂದು ತಿಳಿಸಿದರು.
ತನ್ವೀರ್ ಸೇಠ್ ಅವರು ಕರ್ನಾಟಕ ವಿಧಾನಸಭೆಗೆ ಸತತ ಆರು ಬಾರಿ ಆಯ್ಕೆಯಾಗಿದ್ದು, ಎರಡು ಬಾರಿ ಸಚಿವ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಲ್ಲದೆ, ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾಗಿ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದಾರೆ. ಸಾರ್ವಜನಿಕ ಕಲ್ಯಾಣ, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದತೆಯ ಪರವಾಗಿ ಅವರ ಸೇವೆ ಜನಮನ್ನಣೆ ಪಡೆದಿದೆ ಎಂದು ಹೇಳಿದರು.
ಅವರ ಆದರ್ಶ ನಾಯಕತ್ವ, ಆಡಳಿತಾತ್ಮಕ ಅನುಭವ ಹಾಗೂ ಜನಸೇವೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರವು ರಾಜ್ಯ ಸಚಿವ ಸಂಪುಟದಲ್ಲಿ ಅವರಿಗೆ ಯೋಗ್ಯ ಸ್ಥಾನ ನೀಡಿ ಗೌರವಿಸಬೇಕು ಎಂದು ಆದೀಲ್ ಶೇಖ್ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಂಜುನಾಥ ಹಾನಗಲ್, ಅಜ್ಜು ಸೌದಗಾರ, ರೆಹಮತ್, ಪ್ರಭು ಮಾಚನೂರು, ಷಾ ಮೆಹಮೂದ್ ಖಾದ್ರಿ, ಫಾತೀಮಾ ಹುಸೇನ್, ಅಫ್ರೂಝ್ ಸುಹಾನ್, ಖಾಜಾ ವಲಿ, ತಸ್ವೀರ್ ಸೇಠ್ ಅಭಿಮಾನಿಗಳ ಬಳಗದ ಪದಾಧಿಕಾರಿಗಳು ಹಾಗೂ ಬೆಂಬಲಿಗರು ಉಪಸ್ಥಿತರಿದ್ದರು.




Recent Comments