ರಾಯಚೂರು: ಪತ್ರಕರ್ತರು ವೃತ್ತಿ ಜೀವನದ ಒತ್ತಡಗಳ ನಡುವೆ ಕುಟುಂಬ ಹಾಗೂ ಮಕ್ಕಳ ಶಿಕ್ಷಣಕ್ಕೂ ಸಮಾನ ಮಹತ್ವ ನೀಡಬೇಕು ಎಂದು ಹಿರಿಯ ಪತ್ರಕರ್ತ ಸುಶೀಲೇಂದ್ರ ಸೋದೆಗಾರ ಸಲಹೆ ನೀಡಿದರು.
ನಗರದ ಪತ್ರಿಕಾ ಭವನದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಪತ್ರಕರ್ತರ ಮಕ್ಕಳಿಗೆ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಅನೇಕ ಪತ್ರಕರ್ತರು ಮಧ್ಯಮ ವರ್ಗದ ಹಿನ್ನೆಲೆಯಿಂದ ಬಂದಿರುವುದರಿಂದ ಮಕ್ಕಳ ಶಿಕ್ಷಣ ವೆಚ್ಚ ಭರಿಸುವುದು ಸವಾಲಾಗುತ್ತದೆ. ಹೀಗಾಗಿ ಪತ್ರಕರ್ತರ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ತಂದು ಮಕ್ಕಳ ವಿದ್ಯಾಭ್ಯಾಸಕ್ಕೆ ವಿಶೇಷ ನೆರವು ದೊರಕುವಂತೆ ಮಾಡಬೇಕು ಎಂದು ಹೇಳಿದರು.
ಹಿರಿಯ ಪತ್ರಕರ್ತ ಕೆ. ಸತ್ಯನಾರಾಯಣ ಮಾತನಾಡಿ, ಸಮಾಜದ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಡುವ ಪತ್ರಕರ್ತರು ಕುಟುಂಬ ನಿರ್ವಹಣೆಯಲ್ಲೂ ಸಾಕಷ್ಟು ಸವಾಲು ಎದುರಿಸುತ್ತಾರೆ. ಇಂತಹ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಮಕ್ಕಳಿಗೆ ಮತ್ತಷ್ಟು ಪ್ರೇರಣೆಯಾಗುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ಹಿರಿಯ ಪತ್ರಕರ್ತ ಶಿವಪ್ಪ ಮಡಿವಾಳ ಅವರ ಪುತ್ರಿ ಕಾಳಿಕಾದೇವಿ ಹಾಗೂ ಛಾಯಾಗ್ರಾಹಕ ಶಿವರಾಜ ಅವರ ಪುತ್ರಿ ಸ್ವಪ್ನಾ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎಚ್. ಶಿವಕುಮಾರ, ಚನ್ನಬಸವ ಬಾಗಲವಾಡ, ಗಿಲ್ಡ್ ಅಧ್ಯಕ್ಷ ವಿಜಯ ಜಾಗಟಗಲ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ ಹೂಗಾರ ಸೇರಿದಂತೆ ಹಲವರು ಉಪಸ್ಥಿತರಿದ್ದರು.




Recent Comments