ರಾಯಚೂರ,ಆ.೭- 2026–27ನೇ ಸಾಲಿನ ಮುಂಗಾರು ಹಂಗಾಮಿಗೆ ತುಂಗಭದ್ರಾ ಜಲಾಶಯದಲ್ಲಿ ಲಭ್ಯವಿರುವ ನೀರಿನ ಹಂಚಿಕೆ ಹಾಗೂ ನೀರು ಒದಗಿಸುವ ಕುರಿತು ನಿರ್ಣಯ ಕೈಗೊಳ್ಳಲು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ (ಐಸಿಸಿ) ಸಭೆಯನ್ನು ಆಗಸ್ಟ್ 11ರಂದು ಕರೆಯಲಾಗಿದೆ.ಕರ್ನಾಟಕ ಸರ್ಕಾರದ ಸಂಪುಟ ದರ್ಜೆಯ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿಯ ಸಭಾಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಅವರ ನಿರ್ದೇಶನದ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿದೆ.ಸಭೆಯು ಆಗಸ್ಟ್ 11ರಂದು ಮಂಗಳವಾರ ಮಧ್ಯಾಹ್ನ 3.30 ಗಂಟೆಗೆ ಮುನಿರಾಬಾದ್ನ ಕಾಡಾ–ತುಂಗಭದ್ರಾ ಯೋಜನೆ (ಟಿಬಿಪಿ) ಸಭಾಂಗಣದಲ್ಲಿ ನಡೆಯಲಿದೆ. ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರಿನ ಪ್ರಮಾಣ, ನೀರಿನ ಹಂಚಿಕೆ ಹಾಗೂ ರೈತರಿಗೆ ನೀರು ಒದಗಿಸುವ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.ಸಭೆಯಲ್ಲಿ ಸಚಿವ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರು ಭಾಗವಹಿಸಲಿದ್ದಾರೆ. ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಸಭೆಗೆ ಆಹ್ವಾನಿಸಲಾಗಿದ್ದು, ನೀರಾವರಿ ವ್ಯವಸ್ಥೆಗೆ ಸಂಬಂಧಿಸಿದಂತೆ ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡುವಂತೆ ಕೋರಲಾಗಿದೆ.ಈ ಕುರಿತು ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರ ಎಸ್.ಬಿ. ಮಲ್ಲಿಗವಾಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.





Recent Comments